For the best experience, open
https://m.bcsuddi.com
on your mobile browser.
Advertisement

'ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ'- ರಾಜ್ಯ ಸರ್ಕಾರವನ್ನು ಹಾಡಿಹೊಗಳಿದ ರಾಜ್ಯಪಾಲ ಗೆಹ್ಲೋಟ್

12:41 PM Feb 12, 2024 IST | Bcsuddi
 ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ   ರಾಜ್ಯ ಸರ್ಕಾರವನ್ನು ಹಾಡಿಹೊಗಳಿದ ರಾಜ್ಯಪಾಲ ಗೆಹ್ಲೋಟ್
Advertisement

ಬೆಂಗಳೂರು: ದೇಶಕ್ಕೆ ಕರ್ನಾಟಕ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾದರಿಯಾಗಿವೆ ಎಂದು ಸರ್ಕಾರವನ್ನು ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್ ಹಾಡಿ ಹೊಗಳಿದ್ದಾರೆ.

ಕರ್ನಾಟಕ ವಿಧಾನ ಮಂಡಲದ ಬಜೆಟ್ ಅಧಿವೇಶನದ ಆರಂಭದ ದಿನ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಸರ್ಕಾರವು ನಡೆ ನುಡಿಗಳಗಳನ್ನು ಒಂದಾಗಿಸಿಕೊಂಡು ಕೆಲಸ ಮಾಡುತ್ತಿದೆ. ಕರ್ನಾಟಕ ಮಾದರಿಯನ್ನು ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಅನುಸರಿಸುತ್ತಾ ಬಂದಿದೆ. ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದಾಗಿ ಬಡವರಿಗೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಸಾಂತ್ವನವನ್ನು ಒದಗಿಸಿವೆ ಎಂದು ಹೇಳಿದರು.

ಶಕ್ತಿ, ಅನ್ನಭಾಗ್ಯ, ಯುವನಿಧಿ, ಗೃಹಲಕ್ಷ್ಮೀ, ಗೃಹಜ್ಯೋತಿ ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ತೃಪ್ತಿ ನೀಡಿವೆ ಎಂದು ಅವರು ಹೇಳಿದರು.ಆರ್ಥಿಕ ಅಸಮಾನತೆಯಿಂದ ಅಶಕ್ತರಾಗಿರುವ ಜನತೆಯ ಬದುಕಿಗೆ ಕೇವಲ ಈ ಗ್ಯಾರಂಟಿಗಳು ಮಾತ್ರ ಸಾಕಾಗುವುದಿಲ್ಲ ಎನ್ನುವ ಅರಿವು ಸರ್ಕಾರಕ್ಕೆ ಇದೆ. ಸರ್ಕಾರವು ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಎರಡು ಕೋಟಿಗೂ ಅಧಿಕ ಕುಟುಂಬಗಳು ಬಡತನ ರೇಖೆಗಿಂತ ಹೊರಗೆ ಬಂದು ಮಧ್ಯಮ ವರ್ಗದ ಸ್ಥಿತಿಗೆ ಏರುತ್ತಿವೆ. ಸರ್ಕಾರದ ಒಂದು ನಿರ್ಣಯದಿಂದ ರಾಜ್ಯದ 5 ಕೋಟಿಗೂ ಹೆಚ್ಚು ಜನರು ಮಧ್ಯಮ ವರ್ಗದ ಸ್ಥಿತಿಗೆ ಬಂದಿರುವುದು ಜಾಗತಿಕ ದಾಖಲೆಯಾಗಿದೆ ಎಂದು ರಾಜ್ಯಪಾಲರು ಹೇಳಿದರು.

Advertisement

ನನ್ನ ಸರ್ಕಾರ ಭವಿಷ್ಯದತ್ತ ದೃಷ್ಟಿ ನೆಟ್ಟಿರುವ ಸರ್ಕಾರ. ಈ ಎಂಟು ತಿಂಗಳಲ್ಲಿ 77,000 ಕೋಟಿಗೂ ಹೆಚ್ಚು ಬಂಡವಾಳವು ರಾಜ್ಯಕ್ಕೆ ಹರಿದು ಬಂದಿದೆ. ಜನವರಿ ತಿಂಗಳ ಅಂತ್ಯದವರೆಗೆ ನಮ್ಮ ರಾಜ್ಯದ ಜಿಎಸ್‌ಟಿ ಸಂಗ್ರಹಣೆಯ ಬೆಳವಣಿಗೆ ದರವು ಇಡೀ ದೇಶದಲ್ಲಿಯೇ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಲು ಖುಷಿಪಡುತ್ತೇನೆ. ಬರಗಾಲವಿದ್ದರೂ ರಸ್ತೆ, ನೀರು, ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಕೈಗಾರಿಕೆ ಮುಂತಾದ ಕ್ಷೇತ್ರಗಳಲ್ಲಿ ರಾಜ್ಯವು ದಾಖಲಾರ್ಹ ಮಟ್ಟದಲ್ಲಿ ಅಭಿವೃದ್ಧಿ ಸಾಧಿಸುತ್ತಿದೆ ಎಂದು ರಾಜ್ಯಪಾಲರು ತಿಳಿಸಿದರು.ಇತ್ತೀಚಿನ ವರ್ಷಗಳಲ್ಲಿ ಬಜೆಟ್​​ನಲ್ಲಿ ಘೋಷಿಸಿದ ಒಟ್ಟು ಘೋಷಣೆಗಳಲ್ಲಿ ಶೇಕಡ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಿ ಕಾರ್ಯಗತಗೊಳಿಸಲಾಗುತ್ತಿರುವುದು ದಾಖಲೆಯ ಸಂಗತಿ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದರು.

ವಿವಿಧ ಮೂಲಗಳಿಂದ ಸಿಗಬೇಕಾದಷ್ಟು ಸಂಪನ್ಮೂಲಗಳು ಸಿಗುತ್ತಿಲ್ಲ. ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೊಡುವ ರಾಜ್ಯಗಳಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆಯ ಪಾಲು ಪಡೆಯುವ ವಿಚಾರದಲ್ಲಿ 10ನೇ ಸ್ಥಾನದಲ್ಲಿದೆ. ಈ ಹಿನ್ನಲೆಯಲ್ಲಿ ನಮಗೆ ನ್ಯಾಯ ಮತ್ತು ನ್ಯಾಯಯುತವಾಗಿ ಸಿಗಬೇಕಾದ ಪಾಲನ್ನು ಪಡೆಯಲು ನನ್ನ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಹೇಳಿದರು.

ರಾಜ್ಯದ 240 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಅವುಗಳಲ್ಲಿ 196 ತಾಲೂಕುಗಳನ್ನ ತೀವ್ರ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಕುಡಿಯುವ ನೀರು ಮತ್ತು ಮೇವಿನ ಲಭ್ಯತೆ ಕಾರ್ಯಕ್ರಮಗಳನ್ನು ಕೈಗೊಳ್ಳಲು 31 ಜಿಲ್ಲೆಗಳಿಗೆ 324 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಗೆಹ್ಲೋಟ್ ಮಾಹಿತಿ ನೀಡಿದರು.

ಜನರ ಅನುಕೂಲಕ್ಕಾಗಿ ನಾಮಫಲಕಗಳ ಶೇಕಡ 60ರಷ್ಟು ಭಾಗವು ಕನ್ನಡದಲ್ಲಿ ಇರಬೇಕೆಂದು ತೀರ್ಮಾನಿಸಿ ಕಾನೂನು ರೂಪಿಸಿ ಅನುಷ್ಠಾನ ಮಾಡಲು ಕ್ರಮವಹಿಸಿದ್ದೇವೆ. ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022 ಕಾಯ್ದೆಯನ್ನು ರೂಪಿಸಲಾಗಿದೆ. ಸದ್ಯದಲ್ಲೇ ಅದು ಅನುಷ್ಠಾನಕ್ಕೆ ಬರಲಿದೆ ಎಂದರು.

ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಸ್ವಾಗತ ದೊರೆಯಿತು. ಗೆಹ್ಲೋಟ್​ರನ್ನು ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದರು. ಈ ವೇಳೆ ವಿಧಾನಸಭೆ ಸ್ಪೀಕರ್ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಇತರರು ಹಾಜರಿದ್ದರು.

Author Image

Advertisement