For the best experience, open
https://m.bcsuddi.com
on your mobile browser.
Advertisement

ಸ್ವಚ್ಛತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ: ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ

07:54 AM Sep 15, 2024 IST | BC Suddi
ಸ್ವಚ್ಛತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ  ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ
ಸ್ವಚ್ಛತೆಗೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ
Advertisement

ಚಿತ್ರದುರ್ಗ: ನಗರದ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಚಿತ್ರದುರ್ಗ ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಹೇಳಿದರು.

ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಶನಿವಾರ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರದ ಜತೆಯಲ್ಲಿ ಸಾರ್ವಜನಿಕರು ಇಚ್ಛಾಶಕ್ತಿಯಿಂದ ಸ್ವಯಂ ಪ್ರೇರಿತವಾಗಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದಾಗ ಮಾತ್ರ ಸ್ವಚ್ಛತಾ ಅಭಿಯಾನ ಯಶಸ್ವಿಯಾಗಲು ಸಾಧ್ಯವಾಗಲಿದೆ ಎಂದು ಹೇಳಿದರು.

Advertisement

ಸಾರ್ವಜನಿಕರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಲು ಸೆ.14 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಅಂದೋಲನ ಆಯೋಜಿಸಲಾಗಿದ್ದು, ಸ್ವಚ್ಛತೆಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಶಾಲಾ-ಕಾಲೇಜು, ದೇವಾಲಯ, ಆಸ್ಪತ್ರೆ, ಉದ್ಯಾನವನಗಳಲ್ಲಿ ವಿವಿಧ ಬಗೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ನಾವೆಲ್ಲರೂ ಸೇರಿ ಚಿತ್ರದುರ್ಗ ನಗರವನ್ನು ಪರಿಪೂರ್ಣ ಸ್ವಚ್ಛತೆ, ಸುಂದರ ನಗರ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಮಾತನಾಡಿ, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಜನರಲ್ಲಿ ನೈರ್ಮಲ್ಯ ಶುಚಿತ್ವ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷವೂ “ಸ್ವಚ್ಛತಾ ಹೀ ಸೇವಾ ಪಾಕ್ಷಿಕ”ವನ್ನು ಆಯೋಜಿಸಲಾಗುತ್ತಿದೆ. ಈ ಬಾರಿ ಸೆ.14 ರಿಂದ ಅ.1 ರವರೆಗೆ ಸ್ವಚ್ಛತಾ ಅಂದೋಲನ ಆಯೋಜಿಸಲಾಗಿದೆ ಎಂದು ಹೇಳಿದರು.

ಪ್ರಸಕ್ತ ದಿನಗಳಲ್ಲಿ ಸ್ವಚ್ಛತೆ ಕುರಿತು ಅರಿವು ಮೂಡಿದೆ. ಶೌಚಾಲಯಗಳ ನಿರ್ಮಾಣ ಆಗಿದೆ. ಇನ್ನೂ ಕೆಲವು ಕಡೆ ಶೌಚಾಲಯಗಳ ನಿರ್ಮಾಣ ಆಗಬೇಕಿದೆ. ಒಂದಿಷ್ಟು ಸುಧಾರಣೆ ಆಗಿದ್ದು, ಇನ್ನೂ ಸುಧಾರಣೆ ಬಾಕಿ ಇದೆ. ಸ್ವಚ್ಛತೆ ಎಂಬುದು ನಮ್ಮ ಮನೆಗಳಲ್ಲಿ ಆಗುವುದಷ್ಟೇ ಅಲ್ಲ. ಪ್ರತಿಯೊಬ್ಬರ ಮನೆ ಮನಗಳಲ್ಲಿಯೂ ಸ್ವಚ್ಚವಾದಗಲೇ ಪರಿಸರ ಶುದ್ಧವಾಗಲಿದೆ ಎಂದು ಹೇಳಿದರು.

ಪ್ರಸ್ತುತ ವಾತವರಣದಲ್ಲಿ ಪ್ಲಾಸ್ಟಿಕ್ ಎಂಬುದು ಹೇರಳವಾಗಿ ಬೆರತು ಹೋಗಿದೆ. ಇದರಿಂದ ಕ್ಯಾನ್ಸರ್, ಹೃದಯಾಘಾತ ಮುಂತಾದ ಮಾರಣಾಂತಿಕ ಖಾಯಿಲೆಗಳು ಹರಡುತ್ತಿವೆ. ಹಾಗಾಗಿ ಇದರಿಂದ ಮುಕ್ತವಾಗಲು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಹಸಿಕಸ-ಒಣಕಸ ವಿಂಗಡಿಸಿ ನಗರಸಭೆ ವಾಹನಗಳಿಗೆ ನೀಡುವ ಮೂಲಕ ನಾವೆಲ್ಲರೂ ಮುಂದಿನ ಪೀಳಿಗೆಗೆ ಸುಂದರ ಹಾಗೂ ಸ್ವಚ್ಚವಾದ ವಾತವಾರಣ ಉಳಿಕೊಳ್ಳಬೇಕು ಎಂದು ಮನವಿ ಮಾಡಿದರು.

ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಮಾತನಾಡಿ, ಗಾಂಧೀಜಿಯವರು ಸ್ವಚ್ಚ ಭಾರತದ ಕನಸನ್ನು ಹೊಂದಿದ್ದರು. ಅವರ ಕನಸಿನಂತೆ 2015ರಲ್ಲಿ ಸ್ವಚ್ಚ ಭಾರತ ಮಿಷನ್ ಯೋಜನೆಯಡಿ ಶೌಚಾಲಯ ನಿರ್ಮಾಣ, ಸ್ವಚ್ಚತಾ ಕಾರ್ಯ, ಉತ್ತಮ ವಾತಾವರಣ ಸ್ಥಾಪಿಸುವ ಕಾರ್ಯ ಮಾಡಲಾಗುತ್ತಿದೆ. ಅದರಂತೆ ಅ.2ರವರೆಗೆ 15 ದಿನಗಳ ಕಾಲ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶಾಲಾ ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ಭಾಷಣ, ಕ್ರೀಡಾಕೂಟಗಳನ್ನು ಆಯೋಜಿಸುವುದು ಹಾಗೂ ದೇವಸ್ಥಾನ, ಮಸೀದಿ, ಪ್ರವಾಸಿ ತಾಣಗಳನ್ನು ಸ್ವಚ್ಛತೆಗೊಳಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರು ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಪ್ರತಿಜ್ಞಾವಿಧಿ ಬೋಧಿಸಿದರು. ನಗರಸಭೆಯಲ್ಲಿ ಸ್ವಚ್ಛತಾ ಸೆಲ್ಪಿ ಪಾಯಿಂಟ್‌ಗಳನ್ನು ಸ್ಥಾಪಿಸಿ, ಸಾರ್ವಜನಿಕರಿಗೆ ಸೆಲ್ಫಿಗಳನ್ನು ತೆಗೆದುಕೊಳ್ಳಲು ಉತ್ತೇಜನ ನೀಡಲಾಯಿತು. ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಹಾಗೂ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್, ಪೌರಾಯುಕ್ತೆ ಎಂ ರೇಣುಕಾ ಹಾಗೂ ನಗರಸಭೆ ಸದಸ್ಯರು ಸ್ವಚ್ಛತಾ ಸೆಲ್ಫಿ ಪಾಯಿಂಟ್‌ಗಳಲ್ಲಿ ಸೆಲ್ಫಿ ತೆಗೆದುಕೊಂಡರು.

ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯರಾದ ಸೈಯದ್ ನಸರುಲ್ಲಾ, ಜಯಪ್ಪ ಸೇರಿದಂತೆ ನಗರಸಭೆ ಅಧಿಕಾರಿಗಳು, ನೌಕರರು ಹಾಗೂ ಕಾಲೇಜು ವಿದ್ಯಾರ್ಥಿಗಳು ಇದ್ದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

Tags :
Author Image

Advertisement